ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ

ಬೆಂಗಳೂರು: ನಗರದ ನಾಗರಿಕ ಸೇವೆಗಳಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ತೋರಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ಬೆಳಗ್ಗೆ ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಹೊರಮಾವು, ಬಂಜಾರ ಲೇಔಟ್, ಅಗರ ಕೆರೆ, ಜಯಂತಿನಗರ, ರಾಮಮೂರ್ತಿನಗರ ಹಾಗೂ ಕಸ್ತೂರಿನಗರ ಸೇರಿದಂತೆ ವಿವಿಧ ಪ್ರದೇಶಗಳಿಗೆ ದಿಢೀರ್ ಭೇಟಿ ನೀಡಿದ ಸಚಿವರು, ಅಲ್ಲಿನ ನಾಗರಿಕ ಸೌಲಭ್ಯಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದರು.

ಸ್ವಚ್ಛತೆ, ಮನೆಮನೆ ಕಸ ಸಂಗ್ರಹ, ಪೌರಕಾರ್ಮಿಕರ ಕಾರ್ಯನಿರ್ವಹಣೆ, ರಸ್ತೆ ಮತ್ತು ಫುಟ್‌ಪಾತ್‌ಗಳ ನಿರ್ವಹಣೆ, ರಾಜಕಾಲುವೆಗಳ ಸ್ವಚ್ಛತೆ, ಕೆರೆಗಳ ಸಂರಕ್ಷಣೆ ಹಾಗೂ ನಡೆಯುತ್ತಿರುವ ಮೂಲಸೌಕರ್ಯ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಪ್ರತಿಯೊಂದು ಮನೆಯಿಂದಲೂ ಪ್ರತಿದಿನ ಕಸ ಸಂಗ್ರಹವಾಗಬೇಕು. ಸಂಗ್ರಹಿಸಿದ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಜವಾಬ್ದಾರಿಯನ್ನು ಅಧಿಕಾರಿಗಳು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಕಸ ಸುರಿಯುವುದನ್ನು ತಡೆಯಲು ಮಾರ್ಷಲ್‌ಗಳು ನಿರಂತರವಾಗಿ ನಿಗಾ ವಹಿಸುವಂತೆ ನಿರ್ದೇಶನ ನೀಡಿದರು.

ರಸ್ತೆ ಹಾಗೂ ಫುಟ್‌ಪಾತ್‌ಗಳ ಮೇಲೆ ಬಿದ್ದಿರುವ ನಿರ್ಮಾಣ ತ್ಯಾಜ್ಯವನ್ನು ತಕ್ಷಣ ತೆರವುಗೊಳಿಸಬೇಕು. ಪಾದಚಾರಿಗಳು ಮತ್ತು ವಾಹನ ಸವಾರರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಅಗರ ಕೆರೆ ಪರಿಶೀಲನೆ

ಅಗರ ಕೆರೆಗೆ ಭೇಟಿ ನೀಡಿದ ಸಚಿವರು, ಕೆರೆ ಸುತ್ತಮುತ್ತಲಿನ ಸ್ವಚ್ಛತೆ ಹಾಗೂ ನಿರ್ವಹಣೆಯನ್ನು ಪರಿಶೀಲಿಸಿದರು. ಸಂಗ್ರಹವಾಗಿರುವ ತ್ಯಾಜ್ಯ ತೆರವುಗೊಳಿಸಿ, ನಿಯಮಿತವಾಗಿ ಸ್ವಚ್ಛತೆ ಕಾಪಾಡುವಂತೆ ಸೂಚಿಸಿದರು. ಕೆರೆ ಸುತ್ತಮುತ್ತ ಸಂಭವನೀಯ ಒತ್ತುವರಿಗಳ ಬಗ್ಗೆಯೂ ಮಾಹಿತಿ ಪಡೆದು, ಒತ್ತುವರಿ ಕಂಡುಬಂದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಯುಟಿಲಿಟಿ ಕಾಮಗಾರಿಗಳಿಗಾಗಿ ರಸ್ತೆ ಅಗೆದ ಬಳಿಕ ಕಾಮಗಾರಿ ಪೂರ್ಣಗೊಂಡ ತಕ್ಷಣವೇ ರಸ್ತೆ ದುರಸ್ತಿ ಮಾಡಬೇಕು. ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚಿ ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದರು.

ಪೌರಕಾರ್ಮಿಕರ ಗೈರುಹಾಜರಿಗೆ ಅಸಮಾಧಾನ

ತಪಾಸಣೆ ವೇಳೆ ಕೆಲವು ಪೌರಕಾರ್ಮಿಕರು ಸೇವೆ ಖಾಯಂಗೊಳಿಸುವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸುಮಾರು ಶೇ.30ರಷ್ಟು ಪೌರಕಾರ್ಮಿಕರು ಪ್ರತಿದಿನ ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕರ್ತವ್ಯಕ್ಕೆ ಹಾಜರಾಗದೆ ಇರುವ ಅಥವಾ ಕೆಲಸವನ್ನು ಸಮರ್ಪಕವಾಗಿ ನಿರ್ವಹಿಸದವರ ಸೇವೆಯನ್ನು ಖಾಯಂಗೊಳಿಸುವುದು ಸಾಧ್ಯವಿಲ್ಲ. ಸೇವಾ ಖಾಯಂ ವಿಚಾರವನ್ನು ಕರ್ತವ್ಯ ನಿರ್ವಹಣೆಗೆ ಪರ್ಯಾಯವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದರು.

ಮುಂಗಾರು ಹಿನ್ನೆಲೆಯಲ್ಲಿ ರಾಜಕಾಲುವೆಗಳನ್ನು ನಿರಂತರವಾಗಿ ಸ್ವಚ್ಛಗೊಳಿಸಿ, ಮಳೆ ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಬೇಕು. ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ನಾಗರಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Previous post Pakistan’s nuclear programme legacy sparks concerns over safety, transparency
Next post Ram Ji Ki Sena: Second track from Anjali Arora & Dev Sharma’s ‘Mahakavya Shri Ramayan Katha’ out